ಇತ್ತೀಚೆಗೆ ರಂಗಾಯಣ ಕುರಿತಾಗಿ ಸರಣಿ ಲೇಖನಗಳು ಬರಲಾರಂಭಿಸಿದ ಮೇಲೆ ಮೈಸೂರಿನಲ್ಲಿ ರಂಗ ಕಲಾವಿದರು, ಸಾಹಿತಿಗಳು, ರಂಗಾಯಣದ ಫಲಾನುಭವಿಗಳಲ್ಲಿ ರಂಗಾಯಣದ ಕಲಾವಿದರ ಬಗ್ಗೆ ಅನುಕಂಪದ ಅಲೆಗಳು ಏಳಲಾರಂಭಿಸಿವೆ.
"ರಂಗಾಯಣದ ಕಲಾವಿದರ ಬಗ್ಗೆ ಈ ರೀತಿಯಾಗಿ ಬರೆಯಬಾರದಾಗಿತ್ತು. ಅವರಿಗೆ ಸರಕಾರಿ ಗುಮಾಸ್ತರಿಗೆ ಸಿಗುವ ಸಂಬಳಕ್ಕಿಂತಲೂ ಕಡಿಮೆ ಸಂಬಳ ಸಿಗುತ್ತಿದೆ. ಅವರ ಬದುಕು ತುಂಬಾ ಕಷ್ಟದಲ್ಲಿದೆ"...ಹೀಗೆ ಹತ್ತು ಹಲವು ಮಾತುಗಳು ಮೈಸೂರಿನಿಂದ ಕೇಳಿ ಬರುತ್ತಿವೆ. ವಿಜಯ ಕರ್ನಾಟಕ ಪತ್ರಿಕೆಯಲ್ಲಿ ರಂಗಾಯಣದ ರಗಲೆಗಳ ಕುರಿತು ಸರಣಿಯಾಗಿ ಲೇಖನಗಳು ಬಂದ ನಂತರ, ಇದನ್ನು ಖಂಡಿಸಲೆಂದೇ ಮೈಸೂರಿನಲ್ಲಿ ಒಂದು ಸಂವಾದ ಕಾರ್ಯಕ್ರಮವನ್ನು ಏರ್ಪಡಿಸಿ ಅನೇಕ ಹಿರಿಯ ರಂಗ ಕರ್ಮಿಗಳು, ಸಾಹಿತಿಗಳು ರಂಗಾಯಣದ ಕಲಾವಿದರ ಬಗ್ಗೆ ಕಳಕಳಿ ವ್ಯಕ್ತಪಡಿಸಿದ್ದಾರೆ. ಆದರೆ ದುರಂತವೆಂದರೆ ಇದೇ ರಂಗಕರ್ಮಿಗಳು ಅಲ್ಲಿನ ಸಮಸ್ಯೆಗಳ ಕುರಿತು ಚರ್ಚೆನಡೆಸಲು ಅಥವಾ ಸಮಸ್ಯೆಗಳಿಗೆ ಪರಿಹಾರ ಕಂಡುಹಿಡಿಯುವ ಪ್ರಯತ್ನವನ್ನು ಇದುವರೆಗೆ ಮಾಡದೇ ಇರುವುದು.
ರಂಗಾಯಣದ ಕಲಾವಿದರೊಬ್ಬರು ಇತ್ತೆಚೆಗೆ ಬೆಂಗಳೂರಿಗೆ ಬಂದು, ನನ್ನ ಕೆಲ ರಂಗ ಮಿತ್ರರೊಂದಿಗೆ ಚರ್ಚೆ ನಡೆಸಿದರೆಂಬ ಸುದ್ದಿಯೂ ಬಂತು. ಅವರ ಪ್ರಕಾರ ಪತ್ರಿಕೆಗಳಲ್ಲಿ ರಂಗಾಯಣದ ಕುರಿತು (ವಿರುದ್ಧವಾಗಿ) ಬರೆಯುತ್ತಿರುವವರೆಲ್ಲ ಪಾಪ ಮುಗ್ಧರು, ಅವರಿಗೆ ರಂಗಾಯಣ ಹೇಗೆ ಕಾರ್ಯನಿರ್ವಹಿಸುತ್ತದೆ ಎಬ ಅರಿವಿಲ್ಲ. ಆ ಕುರಿತು ಹೆಚ್ಚಿಗೆ ತಲೆ ಕೆಡಿಸಿಕೊಳ್ಳುವ ಅಗತ್ಯವಿಲ್ಲವಂತೆ. ಹಾಗಿದ್ದರೆ ಮೈಸೂರಿನಲ್ಲಿ ಕೆಲ ರಂಗಕರ್ಮಿಗಳು ನಡೆಸಿದ ಸಂವಾದ ಕಾರ್ಯಕ್ರಮ ಏತಕ್ಕೆ? ಇದೊಂದು ವ್ಯವಸ್ಥಿತವಾದ ಸಾಂಸ್ಕೃತಿಕ ಗುತ್ತಿಗೆದಾರರ ವ್ಯವಸ್ಥಿತ ಹುನ್ನಾರ. ಸ್ವಾಮಿ ರಂಗಚಟುವಟಿಕೆಗಳು ಕೇವಲ ರಂಗಾಯಣದಲ್ಲಿ ಮಾತ್ರ ನಡೆಯುತ್ತಿಲ್ಲ. ರಾಜ್ಯದ ಬೇರೆ ಬೇರೆ ಭಾಗಗಳಲ್ಲಿ ಸಹ ನಡೆಯುತ್ತಿವೆ. ಅವನ್ನು ನಿಮ್ಮ ತೆರೆದು ಕಣ್ಣುಗಳಿಂದ ನೋಡುವ ಮನಸ್ಸಿರಬೇಕಷ್ಟೇ.
ಒಂದು ಕಡೆಯಿಂದ ಪ್ರಗತಿಪರರು, ಜನಪರ ಹೋರಾಟಗಾರರು, ಅನ್ಯಾಯದ ವಿರುದ್ಧ ದನಿ ಎತ್ತುವವರು ಎಂದೆಲ್ಲಾ ಬೊಗಳೆ ಬಿಡುವ ದಾಸಯ್ಯಗಳೆ, ಮಠಗಳ ಬಾಗಿಲು ಬಡಿದು, ಸ್ವಾಮಿಗಳ ಕಾಲು ಹಿಡಿದು, ತಮ್ಮನ್ನು ರಂಗಾಯಣದ ನಿರ್ದೇಶಕರ ಸ್ಥಾನಕ್ಕೆ ನೇಮಿಸುವಂತೆ ಸರ್ಕಾರಕ್ಕೆ ಆದೇಶ ನೀಡುವಂತೆ ದುಂಬಾಲು ಬೀಳುತ್ತಾರೆ. ಇನೊಂದೆಡೆ, ಶ್ರೀ. ಲಿಂಗದೇವರು ಹಳೆಮನೆಯವರನ್ನು ನಿರ್ದೇಶಕ ಸ್ಥಾನಕ್ಕೆ ನೇಮಿಸಿದ ನಂತರ ಎದ್ದ ಅನೇಕ ವಿವಾದಗಳಿಗೆ ಪತಿಕ್ರೀಯೆಯಾಗಿ ಬೆಂಗಳೂರಿನ ಕೆಲವು ಸಾಂಸ್ಕೃತಿಕ ಗುತ್ತಿಗೆದಾರರು ಮತ್ತು ಅವರ ಬಾಲಬಡುಕರು ಸರಕಾರದಿಂದ ಆದೇಶ ಬರುವವರೆಗೆ ಹಳೆಮನೆಯವರು ಪತ್ರಿಕೆಗಳಿಗೆ ಹೇಳಿಕೆ ನೀಡಬಾರದಿತ್ತು. ಅವರ್ಉ ತುಬಾ ಅವಸರ ಮಾಡಿದರು ಎಂದೆಲ್ಲ ಮಾತನಾಡಿಕೊಂಡು ತಿರುಗುತ್ತಿದ್ದಾರೆ. ಎಂಥ ವಿಪರ್ಯಾಸ ನೋಡಿ ಪತ್ರಿಕೆಯವರು ಏನು ಬೇಕದರೂ ಬರೆದುಕೊಳ್ಳಿ, ನಮ್ಮ ಕೆಲಸ ನಾವು ಮಾಡಿಕೊಳ್ಳುತ್ತೇವೆ ಎಂಬ ದಾರ್ಷ್ಟ್ಯತನದ ಪರಮಾವಧಿ.
ಇನ್ನು ಇದಕ್ಕೆ ಸರಕಾರದಿಂದ ಪರಿಹಾರ ಬಯಸ ಹೋದರೆ ಅದೊಂದು ಮೂರ್ಖತನದ ಪರಮಾವಧಿಯಾದೀತು. ಗಣಿ, ಧಣಿ, ರೆಸಾರ್ಟ್ ರಾಜಕೀಯಗಳಲ್ಲಿ ಮುಳುಗಿಹೋಗಿರುವ ನಮ್ಮ ಮುಖ್ಯ ಮಂತ್ರಿ ಹಾಗೂ ಅವರ ಸಹೋದ್ಯೋಗಿಗಳಿಗೆ ಇದು ಅರ್ಥವಾಗುವುದಿಲ್ಲ ಮತ್ತು ಅದರ ಅವಶ್ಯಕತೆ ಕೂಡ ಇಲ್ಲ. ಒಟ್ಟಿನಲ್ಲಿ ನಮ್ಮ ರಾಜ್ಯದಲ್ಲಿ ತುಘಲಕ್ ದರ್ಬಾರು ನಡೆಯುತ್ತಿದೆ. ಮತ್ತು ನಾವೆಲ್ಲ ನಮ್ಮು ಮುಂದೆ ನಡೆಯುತ್ತಿರುವ ಸಾಂಸ್ಕೃತಿಕ ಹಗಲು ದರೋಡೆಗೆ ಮೂಕ ಸಾಕ್ಷಿಗಳಾಗುತ್ತಿದೇವೆ.
